
ಕರ್ನಾಟಕ
ಸಚಿವ ತನ್ವೀರ್ ಸೇಠ್ ಪ್ರಕರಣ ಅಧಿವೇಶನದ ಕೊನೆಯಲ್ಲಿ ಪ್ರಸ್ತಾಪಿಸಲು ಬಿಜೆಪಿ ನಿರ್ಧಾರ
ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಟಿಪ್ಪು ಜಯಂತಿ ಆಚರಣೆ ವೇಳೆ ಸಚಿವ ತನ್ವೀರ್ ಸೇಠ್ ಅಶ್ಲೀಲ ಚಿತ್ರ ವೀಕ್ಷಿಸಿದ ಪ್ರಕರಣವನ್ನು ಕೊನೆಯ ದಿನಗಳಲ್ಲಿ ಪ್ರಸ್ತಾಪಿಸಲು ವಿಪಕ್ಷ ಬಿಜೆಪಿ ನಿರ್ಧರಿಸಿದೆ.
ಸೋಮವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ತನ್ವೀರ್ ಸೇಠ್ ಪ್ರಕರಣ ರಾಜಕೀಯವಾಗಿ ಪಕ್ಷಕ್ಕೆ ಒಂದು ಪ್ರಮುಖ ಅಸ್ತ್ರವಾದರೂ ಕಲಾಪ ಹಾಳು ಮಾಡುವುದು ಬೇಡ ಎಂಬ ಉದ್ದೇಶದಿಂದ ಆ ಬಗ್ಗೆ ಕೊನೆಯ ದಿನಗಳಲ್ಲಿ ಪ್ರಸ್ತಾಪಿಸಲು ನಿರ್ಧರಿಸಿದೆ. ಉತ್ತರ ಕರ್ನಾಟಕ ಸಮಸ್ಯೆಗಳು ಮತ್ತು ಮಹದಾಯಿ ವಿಚಾರದ ಬಗ್ಗೆ ಬಿಜೆಪಿ ಬೇಕೆಂದೇ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂಬ ಟೀಕೆಗಳು ಕೇಳಿಬರಬಹುದು. ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ಚರ್ಚೆಗಳು ಮುಗಿದ ಬಳಿಕ ತನ್ವೀರ್ ಸೇಠ್ ಪ್ರಕರಣದ ಬಗ್ಗೆ ಚರ್ಚಿಸುವುದು ಸೂಕ್ತ ಎಂದು ಸಭೆಯಲ್ಲಿ ಬಿಜೆಪಿಯ ಎಲ್ಲ ಶಾಸಕರು ಸರ್ವ ಸಮ್ಮತದಿಂದ ನಿರ್ಧಾರ ಕೈಗೊಂಡಿದ್ದಾರೆ.