
ಮೈಸೂರು
ಭಾವಾಂಕುರ ಕವನ ಸಂಕಲನ ಲೋಕಾರ್ಪಣೆ
ಇಂದಿನ ಯುವ ಪೀಳಿಗೆ ಕನ್ನಡ ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಸಾಹಿತಿ ಡಾ.ಅರವಿಂದ ಮಾಲಗತ್ತಿ ಹೇಳಿದರು.
ಮೈಸೂರಿನ ಕಲಾಮಂದಿರದ ಮನೆಯಂಗಳದಲ್ಲಿ ಸೋಮವಾರ ಮಧುಕುಮಾರ ಹುಣಸೂರು ಅವರ ಭಾವಾಂಕುರ ಕವನ ಸಂಕಲನವನ್ನು ಡಾ.ಅರವಿಂದ ಮಾಲಗತ್ತಿ ಲೋಕಾರ್ಪಣೆಗೊಳಿಸಿದರು.
ಬಳಿಕ ಮಾತನಾಡಿದ ಅವರು ಇಂದಿನ ಯುವಕರಲ್ಲಿ ಓದುವ ಹಾಗೂ ಬರೆಯುವ ಹವ್ಯಾಸ ಕಡಿಮೆಯಾಗುತ್ತಿದೆ. ಕನ್ನಡದ ಕುರಿತು ಅಭಿಮಾನ ಕಡಿಮೆಯಾಗುತ್ತಿದೆ. ಕನ್ನಡ ದಾರಿ ತಪ್ಪುತ್ತಿದೆ. ಕನ್ನಡ ಉಳಿಸಿ ಬೆಳೆಸಲು ಪ್ರಮುಖ ಪಾತ್ರ ವಹಿಸಿ. ಇಂದಿನ ಪೀಳಿಗೆ ಮುಂದಿನ ಪೀಳಿಗೆಗೆ ಕನ್ನಡವನ್ನು ಉಳಿಸಿಕೊಂಡು ಹೋಗಬೇಕು ಎಂದರು. ಮಧುಕುಮಾರ್ ಹುಣಸೂರು ಕವನ ಸಂಕಲನ ಹೊರತರುವ ಸಾಹಸ ಮಾಡಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಮೈಸೂರು ವಿವಿ ಕನ್ನಡ ಸಹ ಪ್ರಾಧ್ಯಾಪಕಿ ಡಾ.ಎಸ್.ಡಿ.ಶಶಿಕಲಾ ಕೃತಿ ಕುರಿತು ವಿವರಿಸಿದರು. ವೇದಿಕೆಯಲ್ಲಿ ಕರ್ನಾಟಕ ಕಾವಲುಪಡೆಯ ರಾಜ್ಯಾಧ್ಯಕ್ಷ ಎಂ.ಮೋಹನ್ ಕುಮಾರ್ ಗೌಡ, ಸಾಹಿತಿ ಟಿ.ಸತೀಶ್ ಜವರೇಗೌಡ, ನಗರಸಭಾ ಸದಸ್ಯ ಸೌರಭ ಸಿದ್ದರಾಜು ಮತ್ತಿತರರು ಉಪಸ್ಥಿತರಿದ್ದರು.