
ಪ್ರಮುಖ ಸುದ್ದಿ
ಅರಣ್ಯ ಅತಿಕ್ರಮಣ ರೈತರಿಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ
ರಾಜ್ಯ(ಬೆಂಗಳೂರು)ಅ.29:- ಅರಣ್ಯ ಅತಿಕ್ರಮಣ ರೈತರಿಗೆ ಈ ಕೂಡಲೇ ಹಕ್ಕು ಪತ್ರಗಳನ್ನು ವಿತರಣೆ ಮಾಡಬೇಕು ಎಂದು ಒತ್ತಾಯಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು.
ನಗರದಲ್ಲಿಂದು ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಜಮಾಯಿಸಿದ ರೈತರು, ರಾಜ್ಯ ಸರ್ಕಾರ, ಅರಣ್ಯ ಅತಿಕ್ರಮಣ ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು. ಕೇಂದ್ರ ಸರ್ಕಾರ ಅರಣ್ಯ ಹಕ್ಕು ಮಾನ್ಯ ಮಾಡುವ ಕಾಯ್ದೆ ಜಾರಿ ಮಾಡಿದ್ದು, ಹತ್ತಾರು ವರ್ಷದಿಂದ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕು ಪತ್ರ ನೀಡಬೇಕಿದೆ.ಅಲ್ಲದೆ, ಹಕ್ಕು ಪತ್ರ ನೀಡಲು ರೈತರ ಪರ ಕಾನೂನುಗಳಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಅರಣ್ಯ ಪ್ರದೇಶದಲ್ಲಿ ದಶಕಗಳಿಂದ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ದೌರ್ಜನ್ಯ ನಡೆಸುತ್ತಿರುವುದರಿಂದ, ರೈತರು ಬೀದಿಗೆ ಬೀಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ಚಿದಾನಂದ ಹ.ಹರಿಜನ, ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಮನೆ, ಗುಡಿಸಲು ಕಟ್ಟಿರುವ ಜನರಿಗೆ ಹಕ್ಕು ಪತ್ರ ವಿತರಿಸಿ, ಒಕ್ಕಲಬ್ಬಿಸದಂತೆ ನೋಡಿಕೊಳ್ಳಬೇಕು. ಜೊತೆಗೆ, ರೈತರು ಬೆಳೆದ, ಬೇಳೆಗೆ ನಿರ್ದಿಷ್ಟ ಬೆಲೆ ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಅನೇಕ ವರ್ಷಗಳಿಂದ ಅತಿಕ್ರಮಣ ಜಮೀನು ಸಾಗುವಳಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರೂ, ಇಲ್ಲಿಯವರೆಗೂ ಅರಣ್ಯ, ಅತಿಕ್ರಮಣ ದಾರರಿಗೆ ಹಕ್ಕು ಪತ್ರ ನೀಡಿ ನೀಡಿಲ್ಕ.ಈ ಬಗ್ಗೆ ಹಲವು ಬಾರಿ ಸರ್ಕಾರದ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. (ಕೆ.ಎಸ್,ಎಸ್.ಎಚ್)