
ಮೈಸೂರು
ವಿಷ ಸೇವಿಸಿ ಪೊಲೀಸ್ ಆತ್ಮಹತ್ಯೆ
ಹುಣಸೂರು ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಒಬ್ಬರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೃತರನ್ನು ಹುಣಸೂರು ನಿವಾಸಿ ಪರಮೇಶ್(31) ಎಂದು ಗುರುತಿಸಲಾಗಿದೆ. ಇವರು ಮೈಸೂರಿನ ನಂಜನಗೂಡು ರಸ್ತೆಯ ಅಡಕನಹಳ್ಳಿ ರಸ್ತೆಯಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಜಾಂಬೂರಿ ಉತ್ಸವದಲ್ಲಿ ವಿಶೇಷ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಮಂಗಳವಾರ ಕರ್ತವ್ಯ ಮುಗಿಸಿ ಮನೆಗೆ ತೆರಳದೆ ಗೌರಿಶಂಕರ ಬಡಾವಣೆಯ ಬಳಿ ಇರುವ ಪಾಳು ಜಾಗದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಮೈಸರಿಯಿಲ್ಲವೆಂಬ ಕಾರಣಕ್ಕಾಗಿ ರಜೆಯ ಮೇಲೆ ತೆರಳಿದ್ದು, ಅಧಿಕಾರಿಗಳು ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು ಎನ್ನಲಾಗಿದೆ. ಇದರಿಂದ ಅವರು ಮಾನಸಿಕವಾಗಿ ಜರ್ಜರಿತರಾಗಿದ್ದರು ಎನ್ನಲಾಗಿದ್ದು, ಇದೇ ಕಾರಣಕ್ಕೆ ಅವರು ಆತ್ಮಹತ್ಯೆಗೆ ಶರಣಾಗಿರಬೇಕೆಂಬ ಅನುಮಾನಗಳು ವ್ಯಕ್ತವಾಗಿದೆ. ಆದರೆ ಅವರು ಸಾಲವನ್ನೂ ಮಾಡಿಕೊಂಡಿದ್ದರು ಎನ್ನುವ ಮಾತುಗಳೂ ಕೇಳಿ ಬರುತ್ತಿವೆ.
ಕೆ.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.