
ಮೈಸೂರು
ಮೈಸೂರು ಜಿಲ್ಲೆಯಲ್ಲಿ ಈವರೆಗೆ ಹಕ್ಕಿಜ್ವರ ಕಂಡುಬಂದಿಲ್ಲ ; ಪತ್ತೆಗೆ ನಿರಂತರ ಕಾರ್ಯಾಚರಣೆ; ರೋಹಿಣಿ ಸಿಂಧೂರಿ
ಮೈಸೂರು,ಜ.6:- ಮೈಸೂರು ಜಿಲ್ಲೆಯಲ್ಲಿ ಈವರೆಗೆ ಹಕ್ಕಿಜ್ವರ ಕಂಡುಬಂದಿಲ್ಲ. ಹಕ್ಕಿಜ್ವರದ ಪತ್ತೆಗಾಗಿ ಜಿಲ್ಲಾಡಳಿತ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ಪಷ್ಟನೆ ನೀಡಿದ್ದಾರೆ.
ಹಕ್ಕಿ ಜ್ವರ ಆತಂಕ ಕುರಿತು ಮಾತನಾಡಿದ ಮೈಸೂರು ಡಿಸಿ ರೋಹಿಣಿ ಸಿಂಧೂರಿ, ಅಕ್ಕಪಕ್ಕದ ರಾಜ್ಯದಲ್ಲಿ ಹಕ್ಕಿಜ್ವರ ಕಂಡುಬಂದಿದೆ. ಅಲ್ಲಿ ಕಲ್ಲಿಂಗ್ ಆಪರೇಷನ್ ಕೂಡ ನಡೆಯುತ್ತಿದೆ. ಕಳೆದ ವರ್ಷ ಮೈಸೂರಿನಲ್ಲಿ ಹಕ್ಕಿಜ್ವರದ ಹಿನ್ನೆಲೆಯಲ್ಲಿ ಕಲ್ಲಿಂಗ್ ಆಪರೇಷನ್ ನಡೆದಿತ್ತು. ಅದಕ್ಕಾಗಿ ಈ ಬಾರಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ವಹಿಸಿದ್ದೇವೆ. ಕೇರಳ ಹಾಗೂ ತಮಿಳುನಾಡು ಗಡಿಯಲ್ಲಿ ಪಕ್ಷಿ ಹಾಗೂ ಕೋಳಿ ಸಾಗಾಟ ನಿಷೇಧ ಮಾಡಲಾಗಿದೆ. ಆ ರಾಜ್ಯಗಳಿಂದ ಬರುವ ವಾಹನಗಳನ್ನ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ವಲಸೆ ಹಕ್ಕಿಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ಎಲ್ಲೆಲ್ಲಿ ವಲಸೆ ಹಕ್ಕಿಗಳು ಬರುತ್ತವೆ ಅಲ್ಲೆಲ್ಲ ಹಿಕ್ಕೆಗಳ ಸಂಗ್ರಹ ಮಾಡಿ ಲ್ಯಾಬ್ ಗೆ ಕಳುಹಿಸಲಾಗಿದೆ. ಈವರೆಗೆ ಬಂದಿರುವ ಲ್ಯಾಬ್ ವರದಿಯಲ್ಲಿ ಹಕ್ಕಿಜ್ವರ ಪತ್ತೆಯಾಗಿಲ್ಲ ಎಂದು ತಿಳಿಸಿದರು.
ಮೃಗಾಲಯಕ್ಕೆ ತಾತ್ಕಾಲಿಕ ಪ್ರವೇಶ ನಿರ್ಬಂಧ ಅಥವಾ ಪ್ರವೇಶ ನಿರ್ಬಂಧ ಅಥವಾ ಇತರೆ ನಿರ್ಧಾರಗಳ ಬಗ್ಗೆ ತೀರ್ಮಾನಿಸಿಲ್ಲ. ಹಕ್ಕಿಜ್ವರ ಪತ್ತೆಯಾದರೆ ಮುಂದಿನ ಹಂತದ ನಿರ್ಧಾರ ಮಾಡುತ್ತೇವೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ಪಷ್ಟಪಡಿಸಿದರು. (ಕೆ.ಎಸ್,ಎಸ್.ಎಚ್)